ಮುರಿಗೆಪ್ಪ ಚನ್ನವೀರಪ್ಪ ಮೋದಿ
ಡಾ. ಮುರಿಗೆಪ್ಪ ಚನ್ನವೀರಪ್ಪ ಮೋದಿ (ಡಾ. ಎಂ ಸಿ ಮೋದಿ ) (ಅಕ್ಟೋಬರ್ ೦೪, ೧೯೧೬-ನವೆಂಬರ್ ೧೧, ೨೦೦೫) ಭಾರತದ ಪ್ರಖ್ಯಾತ ನೇತ್ರತಜ್ಞರಲ್ಲೊಬ್ಬರು.[1] ನೇತ್ರ-ಚಿಕಿತ್ಸೆಯಲ್ಲಿ ಅವರ ಸಾದನೆ ಅನನ್ಯವಾಗಿದೆ. ತಮ್ಮ ಅರವತ್ತು ವರ್ಷಕ್ಕಿಂತ ಮೇಲ್ಪಟ್ಟ ವೃತ್ತಿ ಜೀವನದಲ್ಲಿ ಇವರು ಸುಮಾರು ೭ ಲಕ್ಷಕ್ಕಿಂತ ಹೆಚ್ಚು ಜನರಿಗೆ ನೇತ್ರ ಶಸ್ತ್ರ ಚಿಕಿತ್ಸೆ ಮಾಡಿ ಗಿನ್ನಿಸ್ ದಾಖಲೆ ಸ್ಥಾಪಿಸಿದ್ದಾರೆ. ಭಾರತ ಸರ್ಕಾರವು ಡಾ. ಮೋದಿಯವರನ್ನು 'ಪದ್ಮಭೂಷಣ' ಮತ್ತು 'ಪದ್ಮಶ್ರೀ ಪ್ರಶಸ್ತಿ'ಗಳಿಂದ ಸನ್ಮಾನಿಸಿದೆ.
ಡಾ. ಎಂ ಸಿ ಮೋದಿ M. C. Modi | |
---|---|
![]() ಡಾ.ಎಂ. ಸಿ. ಮೋದಿ | |
ಜನನ | ಮುರಿಗೆಪ್ಪ ಚನ್ನವೀರಪ್ಪ ಮೋದಿ' ೪ ಅಕ್ಟೋಬರ್ ೧೯೧೬ |
ನಿಧನ | [ನವೆಂಬರ್ ೧೧,೨೦೦೫ |
ವೃತ್ತಿ | ನೇತ್ರತಜ್ಞ |
ಜನನ, ವಿದ್ಯಾಭ್ಯಾಸ, ವೃತ್ತಿ ಜೀವನ

'ಮುರಿಗೆಪ್ಪ ಚನ್ನವೀರಪ್ಪ ಮೋದಿ'ಯವರ ಜನ್ಮ ಅಕ್ಟೋಬರ್ ೪ ೧೯೧೬ರಲ್ಲಿ ಬಾಗಲಕೋಟೆಯ ಬೀಳಗಿ ಗ್ರಾಮದಲ್ಲಾಯಿತು. [2] ಮೋದಿಯವರು ಜಮಖಂಡಿಯ ಪಿ ಬಿ ಪ್ರೌಢಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದು ನಂತರ ಬೆಳಗಾವಿ ಆಯುರ್ವೇದ ಕಾಲೇಜಿನಲ್ಲಿ ಓದಿ ಕೆಬಿಎಚ್ಬಿ ಕಣ್ಣಿನ ಆಸ್ಪತ್ರೆ ಹಾಗೂ ರಾಮವಾಡಿ ಕಣ್ಣಿನ ಆಸ್ಪತ್ರೆಯಲ್ಲಿ ವೈದ್ಯ ಶಿಕ್ಷಣ ಪಡೆದರು. ಬಡತನದ ನಡುವೆಯೂ ವಿದ್ಯಾರ್ಜನೆ ಮುಂದುವರೆಸಿದ ಮೋದಿಯವರು ಕೊಲಂಬಿಯಾ ಮತ್ತು ನ್ಯೂಯಾರ್ಕ್ ವಿಶ್ವವಿದ್ಯಾಲಯಗಳಲ್ಲಿ ಸ್ನಾತಕೋತ್ತರ ಪದವಿಗಳಿಸಿದರು. ಬೆಳಗಾವಿಯಲ್ಲಿ ತಮ್ಮ ವೃತ್ತಿ ಜೀವನ ಆರಂಭಿಸಿ ನಂತರ ದಾವಣಗೆರೆಯಲ್ಲಿ ನೆಲೆಸಿದರು. ೧೯೪೨ರಲ್ಲಿ ಕ್ವಿಟ್ ಇಂಡಿಯಾ ಚಳುವಳಿಯ ಸಮಯದಲ್ಲಿ ಮಹಾತ್ಮ ಗಾಂಧಿಯವರ ಭಾಷಣದಿಂದ ಪ್ರೇರಿತರಾಗಿ ಕೆಲವೇ ಸ್ವಯಂಸೇವಕರ ಜತೆ ಹಳ್ಳಿಗಳಿಗೆ ಹೋಗಿ ರೋಗಿಗಳಿಂದ ಹಣ ಪಡೆಯದೆ ಕಣ್ಣಿನ ಶಸ್ತ್ರ ಚಿಕಿತ್ಸೆ ಮಾಡುತ್ತಿದ್ದರು. ಕರ್ನಾಟಕ, ಆಂಧ್ರ ಪ್ರದೇಶ, ತಮಿಳುನಾಡು, ಮಹಾರಾಷ್ಟ್ರ ಮತ್ತು ಇತರ ಹಲವಾರು ರಾಜ್ಯಗಳಲ್ಲಿ ಕಣ್ಣಿನ ಶಸ್ತ್ರ ಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಉಚಿತ ತಪಾಸಣೆ ಮತ್ತು ಚಿಕಿತ್ಸೆ ಮಾಡುತ್ತಿದ್ದರು. ಕಣ್ಣಿನ ಪೊರೆ (ಕ್ಯಟರಾಕ್ಟ್) ತೆಗೆಯುವ ಶಸ್ತ್ರ ಚಿಕಿತ್ಸೆಯಲ್ಲಿ ಪರಿಣಿತಿ ಹೊಂದಿದ್ದ ಡಾ.ಮೋದಿಯವರು ಪ್ರತಿ ಗ್ರಾಮದಲ್ಲೂ ಶಾಲೆ, ಕಾಲೇಜುಗಳನ್ನು ತೆಗೆದುಕೊಂಡು ಅದನ್ನೇ ಚಿಕಿತ್ಸಾ ಕೇಂದ್ರವಾಗಿ ಪರಿವರ್ತಿಸಿ ಸತತವಾಗಿ ಶಸ್ತ್ರಚಿಕಿತ್ಸೆ ನಡೆಸುತ್ತಿದ್ದರು. ರಷ್ಯಾ ಮತ್ತು ಅಮೇರಿಕ ಸೇರಿದಂತೆ ಹಲವಾರು ರಾಷ್ಟ್ರಗಳಲ್ಲೂ ಸಹ ತಮ್ಮ ಸೇವೆ ಸಲ್ಲಿಸಿ ಗೌರವಗಳಿಗೆ ಪಾತ್ರರಾಗಿದ್ದರು. ದಾವಣಗೆರೆ, ಬೆಂಗಳೂರು ಮತ್ತು ಬೆಳಗಾವಿಗಳಲ್ಲಿ ಕಣ್ಣು ಚಿಕಿತ್ಸಾಲಯಗಳನ್ನು ಸ್ಥಾಪಿಸಿದ ಶ್ರೀಯುತರು ತಮ್ಮ ಆಸ್ಪತ್ರೆಗಳಲ್ಲಿ ಬಡವರಿಗೆ ಉಚಿತ ಸೇವೆ ಒದಗಿಸುತ್ತಿದ್ದರು. ಸಾಮೂಹಿಕ ನೇತ್ರ ಚಿಕಿತ್ಸೆ ಹಾಗೂ ಸಂಚಾರಿ ಘಟಕವನ್ನು ತೆರೆದ ಮೊದಲ ವೈದ್ಯ ಎಂಬ ಖ್ಯಾತಿಯನ್ನು ಗಳಿಸಿದ್ದ ಮೋದಿಯವರು ತಮ್ಮ ಸ್ವಂತ ಹಣವನ್ನು ವ್ಯಯಿಸಿ ಬಡಜನರ ಸೇವೆ ಮಾಡುತ್ತಿದ್ದರು.
ಕಣ್ಣಿನ ಆರೋಗ್ಯದ ಕುರಿತು ಅವರ ಮನಸ್ಸು ಎಷ್ಟು ತುಡಿಯುತ್ತಿತ್ತೆಂದರೆ, ರೈಲಿನಲ್ಲಿ ಪ್ರಯಾಣ ಮಾಡುವಾಗಲೂ ಅಲ್ಲಿನ ಪ್ರಯಾಣಿಕರ ಕಣ್ಣುಗಳನ್ನು ಉಚಿತವಾಗಿ ಪರೀಕ್ಷಿಸಿ ಸಲಹೆ ನೀಡುತ್ತಿದ್ದರು. ಡಾ. ಮೋದಿಯವರೇ ಹೇಳುತ್ತಿದ್ದ ಹಾಗೆ ಮೊದ ಮೊದಲು ರೋಗಿಗಳು ಇವರ ಶಿಬಿರಕ್ಕೆ ಬರಲು ಹಿಂಜರಿಯುತ್ತಿದ್ದರು. ಆಪರೇಷನ್ ಪದ ಕೇಳಿ ಶಿಬಿರಕ್ಕೆ ಬಂದವರಲ್ಲಿ ಕೆಲವರು ಓಡಿ ಹೋಗುತ್ತಿದ್ದರು. ಆದರೆ ಕ್ರಮೇಣ ಶಸ್ತ್ರ ಚಿಕಿತ್ಸೆಗೊಳಗಾಗಿ ದೃಷ್ಟಿಯನ್ನು ಮತ್ತೆ ಪಡೆದವರನ್ನು ಕಂಡು ಶಿಬಿರಕ್ಕೆ ಬರುವವರು ಹೆಚ್ಚಾದರು. ಅವರ ಸೇವೆಯನ್ನು ಗುರುತಿಸಿದ ಅಂದಿನ ಕರ್ನಾಟಕ ಸರ್ಕಾರ, ಏಕವ್ಯಕ್ತಿಯ ಯುದ್ಧ (one man's war) ಎಂಬ ಒಂದು ಕಿರು ದೃಶ್ಯ ದಾಖಲೆಯನ್ನು ಎಂ.ಎನ್. ಸತ್ಯು ಅವರ ನಿರ್ದೇಶನದಲ್ಲಿ ತಯಾರಿಸಿತ್ತು, ಹೀಗೆ ಲಕ್ಷಗಟ್ಟಲೆ ಕುರುಡರಿಗೆ ದೃಷ್ಟಿ ನೀಡಿದ ಆ ಮಹಾನ್ ವ್ಯಕ್ತಿಯ ಜ್ಞಾಪಕಾರ್ಥ ದಾವಣಗೆರೆಯಲ್ಲಿ ಮತ್ತು ಬೆಂಗಳೂರಿನಲ್ಲಿ ಮೋದಿ ಕಣ್ಣಿನ ಆಸ್ಪತ್ರೆಗಳಿವೆ.
ಗಿನ್ನಿಸ್ ದಾಖಲೆ
ಮೋದಿಯವರು ತಿರುಪತಿಯಲ್ಲಿ ಒಂದೆ ದಿನದಲ್ಲಿ ೮೩೩ ಶಸ್ತ್ರ ಚಿಕಿತ್ಸೆ ಮಾಡಿ ವಿಶ್ವ ದಾಖಲೆ ಸ್ಥಾಪಿಸಿದರು. ಒಟ್ಟಾರೆ ೭ ಲಕ್ಷಕ್ಕೂ ಹೆಚ್ಚು ಕಣ್ಣಿನ ಶಸ್ತ್ರ ಚಿಕಿತ್ಸೆ ಕೂಡ ಒಂದು ವಿಶ್ವ ದಾಖಲೆ. ಇವುಗಳನ್ನು ಗಿನ್ನಿಸ್ ದಾಖಲೆಗಳ ಪುಸ್ತಕದಲ್ಲಿ ಸೇರಿಸಲಾಗಿದೆ. ಮೋದಿಯವರು ಎಲ್ಲಾ ಪ್ರಶಸ್ತಿ ಪುರಸ್ಕಾರಗಳಿಂದ ಬಂದ ಹಣವನ್ನು ಬಡವರಿಗಾಗಿ ವ್ಯಯಿಸಿದ್ದಾರೆ.
ಮೋದಿಯವರು ಕೆಲಕಾಲ ಕರ್ನಾಟಕ ವಿಧಾನ ಮಂಡಲದ ಸದಸ್ಯರಾಗಿ ಕಾರ್ಯ ನಿರ್ವಹಿಸಿದ್ದರು. ಮೋದಿಯವರು ನವೆಂಬರ್ ೧೧ ೨೦೦೫ರಲ್ಲಿ, ತಮ್ಮ ೯೦ನೆ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾದರು. ತಮ್ಮ ಕಣ್ಣುಗಳನ್ನು ಮರಣೋತ್ತರವಾಗಿ ದಾನಮಾಡಿದ್ದಾರೆ. ಅವರ ಪುತ್ರ ಡಾ. ಅಮರನಾಥ ಮೋದಿ ಸಹ ನೇತ್ರ ತಜ್ಞರಾಗಿದ್ದಾರೆ.
ಪ್ರಶಸ್ತಿಗಳು, ಸನ್ಮಾನಗಳು
- ೧೯೫೬ ರಲ್ಲಿ ಪದ್ಮಶ್ರೀ ಕೇಂದ್ರ ಸರಕಾರ, ಇವರ ಸೇವೆ ಮತ್ತು ಸಾಧನೆಗಳನ್ನು ಶ್ಲಾಘಿಸಿ ನೀಡಿದ ಪ್ರಶಸ್ತಿ.
- ೧೯೬೮ ರಲ್ಲಿ ಪದ್ಮಭೂಷಣ ಪ್ರಶಸ್ತಿ.
- ಮೈಸೂರು, ಕರ್ನಾಟಕ ಮತ್ತು ಪುಣೆ ವಿಶ್ವವಿದ್ಯಾಲಯಗಳು ಶ್ರೀಯುತರಿಗೆ ಗೌರವ ಡಾಕ್ಟರೇಟ್ ನೀಡಿವೆ.
- ನೈಟ್ ಆಫ್ ಬ್ಲೈಂಡ್, ಅಂಬಾಸೆಡರ್ ಆಫ್ ಗುಡ್ ವಿಲ್ ಮತ್ತು ಇತರ ಹಲವಾರು ಅಂತಾರಾಷ್ಟ್ರೀಯ ಪ್ರಶಸ್ತಿ, ಪುರಸ್ಕಾರಗಳು ಅವರಿಗೆ ಸಂದಿವೆ.
- ಕರ್ನಾಟಕ ಸರ್ಕಾರ ಡಾ. ಎಂ ಸಿ ಮೋದಿಯವರನ್ನು ರಾಜ್ಯೋತ್ಸವ ಪ್ರಶಸ್ತಿಯಿಂದ ಗೌರವಿಸಿದೆ.
ನಿಧನ
ಡಾ.ಎಂ.ಸಿ.ಮೋದಿಯವರು ೨೦೦೫ ನವೆಂಬರ್ ೧೧ರಂದು ನಿಧನರಾದರು. [3]